ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಪ್ರೀತಿಯ ಹೆಸರಿನಲ್ಲಿ ನಿರಂತರ ಮಾನಸಿಕ ಕಿರುಕುಳ ನೀಡುತ್ತಿದ್ದ ಸಹಪಾಠಿಯೊಬ್ಬನಿಂದ ಬೇಸತ್ತ (Shivamogga) ಶಿವಮೊಗ್ಗ ಜಿಲ್ಲೆಯ ಸಾಗರದ (Sagara) ಯುವತಿಯೊಬ್ಬಳು (Bangalore) ಬೆಂಗಳೂರಿನಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಂಜನ (ಹೆಸರು ಬದಲಿಸಲಾಗಿದೆ, 22) ಎಂದು ಗುರುತಿಸಲಾಗಿದೆ. ಯುವತಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಪ್ರದೇಶದ ಅಗ್ರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾಲೇಜು ದಿನಗಳ ಸ್ನೇಹ, ಬಳಿಕ ಕಿರುಕುಳದ ಆರೋಪ
ಸಂಜನ ಮತ್ತು ಆರೋಪಿ ಎಂದು ಹೇಳಲಾಗುತ್ತಿರುವ ಅಭಿಷೇಕ್ ಕಾಲೇಜು ದಿನಗಳಿಂದ ಪರಿಚಿತರಾಗಿದ್ದರು ಎಂದು ತಿಳಿದುಬಂದಿದೆ. ಸುಮಾರು ಒಂದು ವರ್ಷದ ಹಿಂದೆ ಯುವತಿ ಉದ್ಯೋಗ ಅರಸಿ ಬೆಂಗಳೂರಿಗೆ ಆಗಮಿಸಿದ್ದರು. ನಗರದ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದರು.
ಈ ನಡುವೆ ಕಾಲೇಜು ದಿನಗಳ ಪರಿಚಯವನ್ನು ಬಳಸಿಕೊಂಡು ಅಭಿಷೇಕ್ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಹಳೆಯ ವಿಡಿಯೋ ಹಾಗೂ ಫೋಟೋಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.
ಡೆತ್ ನೋಟ್ನಲ್ಲಿ ಗಂಭೀರ ಆರೋಪ
ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ನೋಟ್ನಲ್ಲಿ ತನ್ನ ಸಾವಿಗೆ ಆಲೂರು ಸ್ವಾಮಿ ಅವರ ಪುತ್ರ ಅಭಿಷೇಕ್ ನೇರ ಕಾರಣ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
Also Read>> ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಿದ ಅಪೋಲೋ, ಸುಶೋಧಾ ಸಂಸ್ಥೆ
ಹಳೆಯ ವಿಡಿಯೋ ಹಾಗೂ ಫೋಟೋಗಳನ್ನು ಮುಂದಿಟ್ಟು ಬೆದರಿಕೆ ಹಾಕುತ್ತಿದ್ದ ಆತ, “ರೂಮಿಗೆ ಬಾ” ಎಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಯುವತಿ ಡೆತ್ ನೋಟ್ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.
ಆರೋಪಿ ನೀಡುತ್ತಿದ್ದ ಮಾನಸಿಕ ಹಿಂಸೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ಯುವತಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಈ ವಿಚಾರ ಕುಟುಂಬದವರಿಗೆ ಅಥವಾ ಸಾರ್ವಜನಿಕವಾಗಿ ತಿಳಿದರೆ ಕುಟುಂಬದ ಗೌರವಕ್ಕೆ ಧಕ್ಕೆಯಾಗಬಹುದು ಎಂಬ ಭಯವೂ ಯುವತಿಯನ್ನು ಕಾಡುತ್ತಿತ್ತು ಎನ್ನಲಾಗಿದೆ.
Shivamogga : “ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು”
ತನ್ನ ಸಾವಿಗೆ ಕಾರಣನಾದ ಅಭಿಷೇಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಆರೋಪಿಗೆ ಶಿಕ್ಷೆಯಾಗಬೇಕು ಎಂದು ಯುವತಿ ಡೆತ್ ನೋಟ್ನಲ್ಲಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಘಟನೆಯ ಕುರಿತು ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವತಿಯ ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಲಭ್ಯವಿರುವ ಡೆತ್ ನೋಟ್, ಯುವತಿಯ ಮೊಬೈಲ್ ಹಾಗೂ ಚಾಟ್ಗಳ ಪರಿಶೀಲನೆ ನಡೆಸಲಾಗುತ್ತಿದೆ.
ಪ್ರಕರಣದ ಸಂಬಂಧ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ತನಿಖೆಯ ಮುಂದಿನ ಹಂತದಲ್ಲಿ ಘಟನೆಯ ಹಿನ್ನೆಲೆ, ಬ್ಲ್ಯಾಕ್ಮೇಲ್ ಆರೋಪ ಹಾಗೂ ಮೊಬೈಲ್ನಲ್ಲಿರುವ ಡಿಜಿಟಲ್ ಸಾಕ್ಷ್ಯಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









