ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಯಾವುದೇ ಅಭಿವೃದ್ಧಿಯಾಗುತ್ತಿಲ್ಲ ಇಡೀ ನಗರದಲ್ಲಿ ರಸ್ತೆಗಳು ಗುಂಡಿಗಳ ಆಗರವಾಗಿದ್ದು, 24×7 ನೀರು ಸರಬರಾಜು ಕೂಡ ಸರಿಯಾಗಿ ಆಗುತ್ತಿಲ್ಲ. ಯುಜಿಡಿ ಸಮಸ್ಯೆ, ಬೀದಿ ದೀಪಗಳ ಸಮಸ್ಯೆ ಮೀತಿಮೀರಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸೊರಬದಲ್ಲಿ ಜಿಲ್ಲಾ ಮಂತ್ರಿಗಳು 700 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಶಿವಮೊಗ್ಗ ನಗರದಲ್ಲಿ ಅತ್ಯಂತ ಕಠಿಣ ಪರಿಸ್ಥಿತಿ ಇದ್ದು, ನೂರಾರು ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ಗಮನಹರಿಸುತ್ತಿಲ್ಲ. ಡಿ.ಸಿ. ಕಛೇರಿ ಎ.ಸಿ. ಕಛೇರಿ, ಪಾಲಿಕೆ ಅಧಿಕಾರಿ ಸಿಬ್ಬಂದಿಗಳು ತಮ್ಮ ವೈಯಕ್ತಿಕ ಕಾರಣಕ್ಕಾಗಿ ಮಾತ್ರ ಫೈಲುಗಳ ವಿಲೇವಾರಿ ಮಾಡುತ್ತಿದ್ದಾರೆ. ಅದಕ್ಕಾಗಿ ಹೆಚ್ಚಿನ ಸಮಯ ವಿನಿಯೋಗಿಸುತ್ತಿದ್ದು, ನಾಗರೀಕರ ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದರು.
ಶ್ರೇಷ್ಠ ನಾಯಕ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಮಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಎಡಗಣ್ಣನ್ನು ಎತ್ತಿಕೂಡ ನೋಡುತ್ತಿಲ್ಲ. ಏರ್ಪೋರ್ಟ್ ರಸ್ತೆಯಲ್ಲಿ ರಾತ್ರಿಹೊತ್ತು ಬೀದಿ ದೀಪಗಳು ಉರಿಯುತ್ತಿಲ್ಲ. ಪ್ರಮುಖ ಬಡಾವಣೆಗಳಲ್ಲಿ ಮತ್ತು ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. 24×7 ನೀರು ಸಂಪು ಮತ್ತು ಮೋಟಾರ್ ಇಲ್ಲದೆ ನೀರಿನ ಟ್ಯಾಂಕಿಗೆ ಮಹಡಿಯ ಮೇಲೆ ಬರುವುದಾಗಿ ಹೇಳುತ್ತಿದ್ದರೂ ಈಗ ಒಂದು ಗಂಟೆ ನೀರು ಬಿಟ್ಟರೆ ಅದೇ ಸಾಕು ಎನ್ನುವ ಮಟ್ಟಿಗೆ ಪರಿಸ್ಥಿತಿಯಾಗಿದೆ. ಜನರದ್ದೇ ದುಡ್ಡಿನಲ್ಲಿ ಕನೆಕ್ಷನ್ ಕೊಡಿಸಿದ ಮಹಾನುಭಾವರು ಅಗೆದ ಗುಂಡಿಗಳನ್ನೂ ಕೂಡ ಮುಚ್ಚುತ್ತಿಲ್ಲ. ಎಲ್ಲಾ ರಸ್ತೆಗಳು ನೀರಿಗಾಗಿ ಹಾಳಾಗಿದೆ. ಜನರ ಬಳಿ ಕಟ್ಟಿಸಿಕೊಂಡ ದುಡ್ಡಿನಲ್ಲೇ ಡಾಂಬರೀಕರಣ ಮಾಡಬಹುದಿತ್ತು. ಮೊದಲು ಸಚಿವರು ನಗರದ ಎಲ್ಲಾ ರಸ್ತೆಗಳಿಗೆ ಡಾಂಬರೀಕರಣ ಮಾಡಲಿ ಕಳೆದ ಎರಡೂವರೆ ವರ್ಷಗಳಿಂದ ಯಾವುದೇ ಕಾಮಗಾರಿ ಆಗಿಲ್ಲ ಎಂದರು.
ಯುಜಿಡಿ, ಬಾಕ್ಸ್ ಡ್ರೈನೇಜ್ ಸಮಸ್ಯೆ ಕೂಡ ಗಂಭೀರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರೌಡಿಸಂ, ಗಾಂಜಾ, ಓಸಿ ಎಲ್ಲೆಮೀರಿದೆ. ಟ್ರಾಫಿಕ್ ಪೊಲೀಸರು ದಂಡ ಹಾಕುವುದರಲ್ಲಿ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಮರದ ಮೂಲೆಯಲ್ಲಿ ಅಡಗಿಕೊಂಡು ದರೋಡೆಕೋರರನ್ನು ಹಿಡಿದ ಹಾಗೆ ಅಮಾಯಕರನ್ನು ಹಿಡಿದು ದಂಡ ಹಾಕುತ್ತಿದ್ದಾರೆ. ಎಷ್ಟಿದೆಯೋ ಅಷ್ಟು ವಸೂಲಿ ಕೂಡ ಮಾಡುತ್ತಿದ್ದಾರೆ ಇದು ನಿಲ್ಲಬೇಕು ಈ ಸಚಿವರಿಗೆ ಮುಖ್ಯಮಂತ್ರಿಗಳಿಗೆ ಆಪ್ತರಾಗಿದ್ದು ಕೂಡಲೇ ಅನುದಾನ ತಂದು ನಗರವನ್ನು ಗುಂಡಿಭಾಗ್ಯಗಳಿಂದ ಕಾಪಾಡಿ ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರಾದ ದೀಪಕ್ಸಿಂಗ್, ಹೆಚ್.ಎಂ. ಸಂಗಯ್ಯ, ಶ್ಯಾಂ, ಗಂಧದಮನೆ ನರಸಿಂಹ, ಬೊಮ್ಮನಕಟ್ಟೆ ಮಂಜುನಾಥ್, ರಮೇಶ್ನಾಯಕ್, ವಿಜಯಕುಮಾರ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















