ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ವಿದ್ಯೆಗೆ ತಕ್ಕಂತೆ ಉದ್ಯೋಗ ಸಿಗಬೇಕಾದರೆ ಕೌಶಲ್ಯ ಅಭಿವೃದ್ಧಿ ಅತ್ಯಗತ್ಯ. ಉದ್ಯೋಗ ಕೌಶಲ್ಯಗಳ ಕಾರ್ಯಾಗಾರಗಳು ಯುವಜನರನ್ನು ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ಸಿದ್ಧಗೊಳಿಸುವ ಪ್ರಕ್ರಿಯೆಯಾಗಿದೆ ಎಂದು ಪ್ರಾಚಾರ್ಯ ಡಾ. ರವೀಂದ್ರ ಹೇಳಿದರು.
ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಮೃದು ಮತ್ತು ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನರು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಮತ್ತು ಯಶಸ್ವಿಯಾಗಲು ಅನುವಾಗುವಂತೆ ಉನ್ನತ ಗುಣಮಟ್ಟದ ಹಾಗೂ ಉದ್ಯೋಗ ಕೌಶಲ್ಯದ ಪರಿಸರವನ್ನು ಸದಾ ಕಾಲ ನಮ್ಮ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ನೀಡುತ್ತಾ ಬರುತ್ತಿದೆ ಹಾಗೂ ಹಲವು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆದಿದ್ದಾರೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನಿನ ಅಜೇಯ್ ಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಪ್ರಪಂಚದಲ್ಲಿ ವಿದ್ಯಾರ್ಹತೆ, ಬುದ್ಧಿ ಇದ್ದರಷ್ಟೇ ಸಾಲದು ಅದಕ್ಕೆ ತಕ್ಕಂತೆ ಕೌಶಲ್ಯ ಇರಬೇಕು. ಇಂದಿನ ಯುವಕ ಯುವತಿಯರು ವಿದ್ಯಾರ್ಹತೆಗೆ ತಕ್ಕಂತೆ ವಿವಿಧ ಕೌಶಲ್ಯಗಳ ತರಬೇತಿ ಹೊಂದಬೇಕು. ಆಗ ಉದ್ಯೋಗ ಸುಲಭವಾಗಿ ಸಿಗುತ್ತದೆ. ಸಂವಹನ ಕೌಶಲ್ಯ, ತಾಂತ್ರಿಕ ಕೌಶಲ್ಯ, ಸಮಸ್ಯೆ ಪರಿಹಾರಗಳು ಇಂದು ಅಗತ್ಯವಿದೆ ಎಂದರು.
ಕಾರ್ಯಾಕ್ರದಲ್ಲಿ ಇಂಡಿಯಾ ಫೌಂಡೇಶನಿನ ನವೀನ್, ಸಹಾಯಕ ಪ್ರಾಧ್ಯಾಪಕರಾದ ಡಾ. ಕೋಟೋಜಿರಾವ್ ಆರ್, ಅಶ್ವಿನಿ, ಪ್ರಕಾಶ್ ಉಪಾಧ್ಯಾಯ, ಬಾಲಾಜಿ, ಪ್ರಶಾಂತ ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








