ಕಲ್ಪ ಮೀಡಿಯಾ ಹೌಸ್ | ಸೊರಬ |
ವಿಧಾನ ಪರಿಷತ್ ಚುನಾವಣೆಯನ್ನು #Parishad Election ಬಿಜೆಪಿಯು ಗಂಭೀರವಾಗಿ ಪರಿಗಣಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಮೊದಲ ಪ್ರಾಶಸ್ತ್ಯ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಪದವೀಧರರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಡೆ ಪ್ರವಾಸ ಕೈಗೊಂಡ ವೇಳೆಯಲ್ಲಿ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪರವಾಗಿ ಉತ್ತಮ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಗೆಲುವಿನ ವಾತಾವರಣ ಎದ್ದು ಕಾಣುತ್ತಿದ್ದು, ಡಾ. ಧನಂಜಯ ಸರ್ಜಿ ಮತ್ತು ಭೋಜೇಗೌಡರು ಗೆಲ್ಲುವುದು ಶತಸಿದ್ಧ ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕವೇ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದಾಗಿ ಕಾಂಗ್ರೆಸ್ ಭ್ರಮೆಯಲ್ಲಿದೆ. ಅವರ ಕನಸ್ಸು ನುಚ್ಚು ನೂರಾಗಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ಸೊರಬ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರ ಮತಗಳ ಬಹುಮತ ದೊರೆಯಲಿದೆ. ಜಿಲ್ಲೆಯ ಅಭಿವೃದ್ಧಿಗೆ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ರಾಘವೇಂದ್ರ ಅವರ ಕೊಡುಗೆ ಸಾಕಷ್ಟಿದ್ದು, ಕ್ಷೇತ್ರದಲ್ಲಿಯೂ ಸಹ ಅಭಿವೃದ್ಧಿಯ ಶಕೆ ಆರಂಭವಾಗಿದ್ದು, ಹರತಾಳ ಹಾಲಪ್ಪ ಅವರು ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾದ ಸಂದರ್ಭದಲ್ಲಿ ಆರಂಭವಾಯಿತು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಲ್ಲಿ ಪ್ರಚಾರದ ಜಾಹೀರಾತಲ್ಲಿ ತೊಡಗಿದೆ ವಿನಃ ಜನತೆಯ ಪಾಲಿಗೆ ಬದುಕಿದ್ದು ಸತ್ತಂತಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಜರುತ್ತಿಲ್ಲ. ಕಳೆದ ಒಂದು ವರ್ಷದಿಂದ ಯಾವುದೇ ಗುದ್ದಲಿ ಪೂಜೆಗಳು ಸರ್ಕಾರದಿಂದ ಜರುಗಿಲ್ಲ ಮತ್ತು ಹೊಸ ಯೋಜನೆಗಳು ಜಾರಿಯಾಗಿಲ್ಲ. ಕಳೆದೊಂದು ವರ್ಷದಿಂದ ಜನರ ಮೇಲೆ ಕಿವಿ ಮೇಲೆ ಹೂವಿಡುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಯ ಸ್ಪರ್ಧೆಯಿಂದ ಪಕ್ಷಕ್ಕೆ ತೊಡಕಾಗದು. ಈ ಹಿಂದೆ ಅವರಿಗೆ ಪಕ್ಷದಿಂದ ಎಲ್ಲಾ ಅವಕಾಶಗಳನ್ನು ನೀಡಿದೆ. ಪಕ್ಷದಿಂದ ಎಲ್ಲವನ್ನು ಪಡೆದು ಎಡವಿದ್ದಾರೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರೇ ಈ ಹಿಂದೆ ಡಾ. ಧನಂಜಯ ಸರ್ಜಿಯವರನ್ನು ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಬೇಕು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು ಎಂದ ಅವರು, ಕಾಂಗ್ರೆಸ್ ಸರ್ಕಾರ ಯಾವುದೇ ಕ್ಷಣದಲ್ಲಿ ಬೀಳುವ ಸಂದರ್ಭವಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲ್ಲಲೇ ಬೇಕು ಎನ್ನುವ ವಿಶ್ವಾಸದೊಂದಿಗೆ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಹಾಗೂ ಸ್ಥಳೀಯ ಸಂಸ್ಥೆಗಳಾದ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಟಿಕೇಟ್ ನೀಡಲಾಗುವುದು ಎಂದರು.
Also read: ಕೆಸಿಇಟಿ ಫಲಿತಾಂಶ: 100 ರೊಳಗೆ 10 ರ್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು
ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಪಕ್ಷದ ಕಾರ್ಯಕರ್ತರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೂಚನೆಯಂತೆ ಶ್ರಮವಹಿಸಿ ದುಡಿಯುತ್ತಿದ್ದಾರೆ. ತಮಗೂ ಸಹ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಕ್ಷದ ಅಧ್ಯಕ್ಷರು ಹೊಸ ಮಾದರಿಯಲ್ಲಿ ಮತದಾರರನ್ನು ತಲುಪಲು ನೂತನ ಯೋಜನೆಗಳನ್ನು ರೂಪಿಸಿದ್ದಾರೆ. ಅದು ಫಲಕಾರಿಯಾಗುತ್ತಿದೆ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಟಿ. ಪ್ರಕಾಶ್, ತಾಲೂಕು ಪ್ರಭಾರಿ ಎನ್.ಕೆ. ಜಗದೀಶ್, ಟೌನ್ ಅಧ್ಯಕ್ಷ ಅಶೋಕ್ ಶೇಟ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಮಧುರಾಯ್ ಜಿ. ಶೇಟ್, ಪ್ರಮುಖರಾದ ದೇವೇಂದ್ರಪ್ಪ, ಶಿವಕುಮಾರ ಕಡಸೂರು, ಚನ್ನವೀರಪ್ಪ, ಗುರುಕುಮಾರ ಪಾಟೀಲ್, ಜಾನಕಪ್ಪ ಒಡೆಯರ್, ಮಲ್ಲಿಕಾರ್ಜುನ ದ್ವಾರಳ್ಳಿ, ಗೀತಾ ಮಲ್ಲಿಕಾರ್ಜುನ, ಸುಧಾ ಶಿವಪ್ರಸಾದ್, ವಿನಯ್ ಶೇರ್ವಿ, ಆಶೀಕ್ ನಾಗಪ್ಪ ಸೇರಿದಂತೆ ಇತರರಿದ್ದರು.
ಮೂರೇ ದಿನದಲ್ಲಿ ನಾಗೇಶ್ ರಾಜೀನಾಮೆ !
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಎರಡ್ಮೂರು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ. ಪಕ್ಷದ ವತಿಯಿಂದ ರಾಜ್ಯದ ಎಲ್ಲಡೆ ಪ್ರತಿಭಟನೆಗಳು ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ತೆಲಂಗಾಣ ಮತ್ತು ಆಂದ್ರ ಪ್ರದೇಶದ ಖಾಸಗಿ ಕಂಪನಿಗಳಿಗೆ ನೀಡುವ ಮೂಲಕ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಹಣವನ್ನು ವರ್ಗಾಹಿಸಲಾಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತಿದ್ದಂತೆ ತರಾತುರಿಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಇದೇ ಮಾದರಿ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post