ಕಲ್ಪ ಮೀಡಿಯಾ ಹೌಸ್ | ಸೊರಬ |
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ಜಾರಿ ಮಾಡಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದೆ. ಈ ಮೂಲಕ ಅಂಬೇಡ್ಕರ್ ರೂಪಿತ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಹೆಚ್.ಇ. ಜ್ಞಾನೇಶ್ ಕಿಡಿಕಾರಿದರು.
ಮಂಗಳವಾರ ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ-2025 ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದು ವರ್ಗಕ್ಕೆ ಸೀಮಿತವಾಗಿ ಓಲೈಕೆ ರಾಜಕಾರಣಕ್ಕೆ ಅಂಟಿಕೊಂಡು ಅರಾಜಕತೆ ಸೃಷ್ಟಿಸುತ್ತಿರುವುದರ ಜತೆಗೆ ವಿಪಕ್ಷಗಳ ಧ್ವನಿ ಅಡಗಿಸುವ ಹುನ್ನಾರ ನಡೆಸಿದೆ. ಇದಕ್ಕೆ ಬಿಜೆಪಿ ಹೆದರಿ ಹಿಂದೆ ಸರಿಯುವುದಿಲ್ಲ. ಬದಲಾಗಿ ಖಂಡಿಸುತ್ತೇವೆ. ಸರ್ಕಾರ ಪ್ರತಿಬಂಧಕ ಕಾಯ್ಕೆ ಹಿಂದೆ ಪಡೆಯುವವರೆಗೂ ಹೋರಾಟ ನಡೆಯುತ್ತದೆ ಎಂದು ಎಚ್ಚರಿಸಿದರು.
ತಾಲೂಕು ಮಂಡಲ ಅಧ್ಯಕ್ಷ ಪ್ರಕಾಶ್ ಆಗಸನಹಳ್ಳಿ ಮಾತನಾಡಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಒಂದು ಕೋಮಿನ ಓಲೈಕೆಗಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತಿದೆ. ಭಾರತೀಯ ನ್ಯಾಯ ಸಂಹಿತೆ ಕಲಂ 195 ಮತ್ತು 298ರಂತೆ ಸೌಹಾರ್ದತೆಗೆ ಭಂಗ ತರುವವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಬಲವಾದ ಕಾನೂನು ಜಾರಿಯಾಗಿದ್ದರೂ ಸಹ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸಲು ಹೊರಟಿರುವ ಕ್ರಮ ಕಾಂಗ್ರೆಸ್ನ ನೀತಿಗೇಡಿತನವನ್ನು ಪ್ರಚುರಪಡಿಸಿದೆ. ಆದ್ದರಿಂದ ಮಸೂದೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಇದಕ್ಕೂ ಮೊದಲು ಪಟ್ಟಣದ ಪುರಸಭೆ ವೃತ್ತದಿಂದ ಬಿಜೆಪಿ ಮುಖಂಡರು ಪ್ರತಿಭಟನಾ ಮೆರವಣ ಗೆ ನಡೆಸಿ, ತಾಲೂಕು ಕಛೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಮಹಿಳಾ ಘಟಕದ ಅಧ್ಯಕ್ಷೆ ಹೊಳಿಯಮ್ಮ, ಮಾಜಿ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಾಣ ರಾಜಪ್ಪ, ಪುರಸಭಾ ಮಾಜಿ ಸದಸ್ಯರಾದ ಮಧುರಾಯ ಜಿ. ಶೇಟ್, ನಟರಾಜ್ ಉಪ್ಪಿನ, ಮುಖಂಡರಾದ ವಿಜಯಗೌಡ್ರು, ಗಜಾನನರಾವ್, ನಿರಂಜನ ದೊಡ್ಮನೆ, ಗುರುಪ್ರಸನ್ನಗೌಡ, ವೈ.ಜಿ. ಗುರುಮೂರ್ತಿ, ಯಶೋಧರ, ವಿನಾಯಕ ಬುಳ್ಳಿ, ಡಿ. ಶಿವಯೋಗಿ, ಬಸವರಾಜ, ಸುಧೀರ್ ಪೈ ಮೊದಲಾದವರು ಹಾಜರಿದ್ದರು.
ವರದಿ: ಮಧು ರಾಮ್ ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















