ಕಲ್ಪ ಮೀಡಿಯಾ ಹೌಸ್ | ಸೊರಬ |
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರೂ ಸೇರಿದಂತೆ ಎಲ್ಲ ವರ್ಗದ ಜನರ ಬದುಕು ದುಸ್ಥರವಾಗಿದ್ದು, ಭಾಗ್ಯಗಳ ಹೆಸರಿನಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಪಟ್ಟಣದ ರಂಗನಾಥ ಸ್ವಾಮಿ ದೇವಾಲಯದ ಎದುರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ರೈತರ ಹೊಲಕ್ಕೆ ಟಿಸಿ ಹಾಕಲು 25 ಸಾವಿರ ರೂ. ಸಾಕಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಈಗ ಇದೇ ಕೆಲಸಕ್ಕೆ 2 ಲಕ್ಷ ರೂ. ಕೊಡಬೇಕಾದ ದುಃಸ್ಥಿತಿ ಎದುರಾಗಿದೆ ಎಂದು ಟೀಕಿಸಿದರು.
ಸೊರಬಕ್ಕೆ ನೀರಾವರಿ ಕ್ಷೇತ್ರದಲ್ಲಿ ಅತಿ ಹೆಚ್ಚು ಕೊಡುಗೆ ನೀಡಿದ್ದೇ ಯಡಿಯೂರಪ್ಪನವರು. #Yadiyurappa ಕಾಂಗ್ರೆಸ್ ಪಕ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುವುದಿಲ್ಲ. ಗೃಹ ಲಕ್ಷ್ಮಿ ಯೋಜನೆ ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರ ಉಚಿತ ಯೋಜನೆಗಳಿಗಾಗಿ ಇಲ್ಲಿ ಕಿತ್ತುಕೊಂಡು ಅಲ್ಲಿ ಕೊಡುತ್ತಿದೆ ಅಷ್ಟೇ ಎಂದು ಕಿಡಿ ಕಾರಿದರು.
Also read: ನೆನಪಿಡಿ! ಮತದಾನ ಮಾಡದವರಿಗೆ ಟೀಕಿಸುವ ನೈತಿಕತೆ ಇರುವುದಿಲ್ಲ: ಡಾ.ಸಿ.ಎನ್. ಮಂಜುನಾಥ್
ಕಳೆದ 10 ವರ್ಷಗಳಲ್ಲಿ ದೇಶದ ಸಮಗ್ರವಾಗಿ ಅಭಿವೃದ್ಧಿಯ ಉತ್ತುಂಗದೆಡೆಗೆ ಸಾಗುತ್ತಿದೆ. ಮೋದಿಯವರ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸುವ ಪ್ರತಿ ಯೋಜನೆಯೂ ದೇಶದ ಕಟ್ಟಕಡೆಯ ವ್ಯಕ್ತಿಗೂ ಯಾವುದೇ ರೀತಿಯ ಮಧ್ಯವರ್ತಿಗಳಿಲ್ಲದೇ ನೇರವಾಗಿ ತಲುಪಬೇಕು ಎನ್ನುವುದು ನಮ್ಮ ಸರ್ಕಾರದ ಆಶಯವಾಗಿದೆ. ಇದಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಅಭಿವೃದ್ಧಿ ವಿಚಾರದಲ್ಲಿ ಯಡಿಯೂರಪ್ಪ ಅವರಿಗಿಂತಲೂ ರಾಘವೇಂದ್ರ ಅವರು 10 ಹೆಜ್ಜೆ ಇರಿಸುತ್ತಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಮುಂದುವರೆಯಲು ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಕೋರಿದರು.
ಪ್ರಚಾರದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಲಾಗಿದ್ದು, ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಸೊರಬ ಬಿಜೆಪಿ ಅಧ್ಯಕ್ಷ ಪ್ರಕಾಶ್, ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್, ಪ್ರಮುಖರಾದ ವಿ.ಜಿ. ಪರಶುರಾಮ್, ರಾಜು, ಶಿವಕುಮಾರ್ ಸೇರಿದಂತೆ ಹಲವರು ಇದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























