Read - 3 minutes
ಕಲ್ಪ ಮೀಡಿಯಾ ಹೌಸ್ | ಸೊರಬ |
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಜನತೆ ತೋರಿದ ವಿಶ್ವಾಸವೇ ಸಾಕ್ಷಿಯಾಗಿದ್ದು, ಕಾಂಗ್ರೆಸ್ಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಾಧ್ಯವಾಗದಂತೆ ಫಲಿತಾಂಶ ನೀಡಿದ್ದಾರೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸಮೀಪದ ಬಿಜೆಪಿ ಕಚೇರಿ ಮುಂಭಾಗದ ಆವರಣದಲ್ಲಿ ಬಿಜೆಪಿ ಮಂಡಲ ವತಿಯಿಂದ ಕರೆದಿದ್ದ ಪಕ್ಷದ ಕಾರ್ಯಕರ್ತರ ಮತ್ತು ಮುಖಂಡರ ’ಬೂತ್ ಶಕ್ತಿ ಸದೃಢ ಭಾರತ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ಧಾಂತರ ಆಧಾರದ ಮೇಲೆ ಬಲಿಷ್ಟವಾಗಿರುವ ಬಿಜೆಪಿ ಪಕ್ಷಕ್ಕೆ ಗುಜರಾತ್ ಚುನಾವಣೆಯ ಫಲಿತಾಂಶ ಮಾದರಿಯಾಗಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶ ವಿಶ್ವ ಗುರುವಾಗಿ ಹೊರ ಹೊಮ್ಮಿದೆ. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ಶಾ ಅವರ ಚಾಣಕ್ಷತನದಿಂದ ದೇಶದ ಅನೇಕ ರಾಜ್ಯಗಳಲ್ಲಿ ಅಸ್ತಿತ್ವಕ್ಕಾಗಿಯೇ ಹೆಣಗಾಡುತ್ತಿರುವ ಕಾಂಗ್ರೆಸ್ ಲೋಕಸಭೆಯಲ್ಲೂ ಸಹ ವಿಪಕ್ಷ ಸ್ಥಾನದಲ್ಲಿ ಕೂರಲು ಸಾಧ್ಯವಿಲ್ಲದಂತಾಗಿದೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ತಾಲೂಕು ಸೇರಿದಂತೆ 140-150 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಸಾಮಾಜಿಕ ಜಾಲತಾಣಗಳ ಸಮೀಕ್ಷೆಯನ್ನು ಗಂಭೀರವಾಗಿ ಪರಿಗಣಿಸದೆ, ಕಾರ್ಯಕರ್ತರು ಪಕ್ಷದ ಗೆಲುವಿಗೆ ಸಂಘಟಿತರಾಗಿ ಕಾರ್ಯೋನ್ಮುಖರಾಗಬೇಕು ಎಂದು ಕರೆ ನೀಡಿದರು.
ಕಳೆದ ನಾಲ್ಕೂವರೆ ವರ್ಷದಲ್ಲಿ ತಾಲೂಕಿನಲ್ಲಿ ಸಾವಿರಾರು ಕೋಟಿ ರೂ., ಅನುದಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಪಾರದರ್ಶಕವಾಗಿ ಆಡಳಿತ ನಡೆಸುತ್ತಾ, ಫಲಾನುಭವಿಗೆ ನೇರವಾಗಿ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದ ಅವರು, ಅಂತರ ಕಾಯ್ದುಕೊಂಡವರು ಪಕ್ಷದಿಂದ ದೂರವಾಗಿಲ್ಲ. ಅವರು ಸಹ ಬಿಜೆಪಿಯವರೇ ಆಗಿದ್ದು, ಅವರೆಲ್ಲರ ಒಗ್ಗಟ್ಟಿನ ಶ್ರಮದಿಂದ ಪಕ್ಷ ಬಲಿಷ್ಟವಾಗಿದೆ. ಪಕ್ಷದಲ್ಲಿನ ಆಂತರಿಕವಾಗಿ ಇರುವ ಭಿನ್ನಾಭಿಪ್ರಾಯಗಳು ಶೀಘ್ರವೇ ಶಮನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಅನೇಕ ಮುಖಂಡರು ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಉಪಾಧ್ಯಕ್ಷರಾದ ದೇವೇಂದ್ರಪ್ಪ ಚನ್ನಾಪುರ, ಈಶ್ವರ ಚನ್ನಪಟ್ಟಣ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಪ್ರಮುಖರಾದ ಕೆ. ಪ್ರಭಾಕರ ರಾಯ್ಕರ್, ಎಂ. ನಾಗಪ್ಪ, ಎಂ.ಆರ್. ಪಾಟೀಲ್, ಗುರುಕುಮಾರ್ ಪಾಟೀಲ್, ಟಿ.ಆರ್. ಸುರೇಶ್ ಸೇರಿದಂತೆ ಮತ್ತಿತರರಿದ್ದರು.
ಜನಾಕ್ರೋಶ-ಪಾದಯಾತ್ರೆಗಳು ಕೇವಲ ಕಾಂಗ್ರೆಸ್ ಗಿಮಿಕ್:
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಕಾಂಗ್ರೆಸ್ನಿಂದ ಅನ್ಯಾಯವಾಗಿದೆ. ಇದನ್ನು ಮರೆಮಾಚಿಕೊಳ್ಳಲು ಜನಾಕ್ರೋಶ, ಪಾದಯಾತ್ರೆ ಇನ್ನಿತರ ಗಿಮಿಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಸಂತ್ರಸ್ತರ ಬಗ್ಗೆ ಕಾಳಜಿ ತೋರಲಿಲ್ಲ. ಇದನ್ನೆಲ್ಲಾ ಜನತೆ ಸೂಕ್ಷ್ಮವಾಗಿ ಗಮನಿಸಿದ್ದು, ಶರಾವತಿ ಸಂತ್ರಸ್ತರಿಗೆ ನ್ಯಾಯ ದೊರೆಯುವುದು ಬಿಜೆಪಿ ಸರ್ಕಾರದಿಂದ ಮಾತ್ರ. ಈಗಾಗಲೇ ಸುಮಾರು 9 ಲಕ್ಷ ಹೆಕ್ಟೇರ್ ಅರಣ್ಯ ಹಾಗೂ ಇನ್ನಿತರ ಪ್ರದೇಶವನ್ನು ಕಂದಾಯ ಇಲಾಖೆಯ ಸುಪರ್ಧಿಗೆ ನೀಡುವಂತೆ ಅಫಿಡವೀಟ್ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ತರ ಪರವಾಗಿದ್ದಾರೆ. ಜೊತೆಗೆ ಬಗರ್ ಹುಕುಂ ಸಾಗುವಳಿದಾರರಿಗೆ ಬಿಜೆಪಿ ಸರ್ಕಾರ ಹಿತ ಕಾಯುವ ನಿಟ್ಟಿನಲ್ಲಿ ಕಾಯ್ದೆ ತಂದಿದೆ. ಸಾಗುವಳಿದಾರರು ಆತಂಕಕ್ಕೆ ಒಳಗಾಗುವ ಮತ್ತು ವಿಪಕ್ಷಗಳ ಮಾತಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಕಾಂಗ್ರೆಸ್ನಿಂದ ಅನ್ಯಾಯವಾಗಿದೆ. ಇದನ್ನು ಮರೆಮಾಚಿಕೊಳ್ಳಲು ಜನಾಕ್ರೋಶ, ಪಾದಯಾತ್ರೆ ಇನ್ನಿತರ ಗಿಮಿಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಸಂತ್ರಸ್ತರ ಬಗ್ಗೆ ಕಾಳಜಿ ತೋರಲಿಲ್ಲ. ಇದನ್ನೆಲ್ಲಾ ಜನತೆ ಸೂಕ್ಷ್ಮವಾಗಿ ಗಮನಿಸಿದ್ದು, ಶರಾವತಿ ಸಂತ್ರಸ್ತರಿಗೆ ನ್ಯಾಯ ದೊರೆಯುವುದು ಬಿಜೆಪಿ ಸರ್ಕಾರದಿಂದ ಮಾತ್ರ. ಈಗಾಗಲೇ ಸುಮಾರು 9 ಲಕ್ಷ ಹೆಕ್ಟೇರ್ ಅರಣ್ಯ ಹಾಗೂ ಇನ್ನಿತರ ಪ್ರದೇಶವನ್ನು ಕಂದಾಯ ಇಲಾಖೆಯ ಸುಪರ್ಧಿಗೆ ನೀಡುವಂತೆ ಅಫಿಡವೀಟ್ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ತರ ಪರವಾಗಿದ್ದಾರೆ. ಜೊತೆಗೆ ಬಗರ್ ಹುಕುಂ ಸಾಗುವಳಿದಾರರಿಗೆ ಬಿಜೆಪಿ ಸರ್ಕಾರ ಹಿತ ಕಾಯುವ ನಿಟ್ಟಿನಲ್ಲಿ ಕಾಯ್ದೆ ತಂದಿದೆ. ಸಾಗುವಳಿದಾರರು ಆತಂಕಕ್ಕೆ ಒಳಗಾಗುವ ಮತ್ತು ವಿಪಕ್ಷಗಳ ಮಾತಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post