ಕಲ್ಪ ಮೀಡಿಯಾ ಹೌಸ್ | ಸೊರಬ | ವರದಿ: ಮಧುರಾಮ್ |
“ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಸಂದೇಶದ ಮೂಲಕ ಸಮಾಜದಲ್ಲಿದ್ದ ಅಂಧಾನುಕರಣೆ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ಅಸಮಾನತೆಗಳನ್ನು ದೂರ ಮಾಡುವಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಕೊಡುಗೆ ಅಪಾರವಾಗಿದೆ ಎಂದು ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಸೊರಬದಲ್ಲಿ (Soraba) ಹೇಳಿದರು.
ಪಟ್ಟಣದ ಹೊಸಪೇಟೆ ಬಡಾವಣೆಯ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಶುಕ್ರವಾರ ಶ್ರೀ ನಾರಾಯಣಗುರುಗಳ ಧರ್ಮ ಪರಿಪಾಲನಾ ಸಂಘ, ನಾರಾಯಣಗುರು ಸೇವಾ ಸಮಿತಿ ಹಾಗೂ ಎಸ್ಎನ್ಜಿವಿ ನೇತೃತ್ವದಲ್ಲಿ, ಈಡಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾರಾಯಣಗುರುಗಳು ಸಮಾಜದ ಕಟ್ಟಕಡೆಯ ಜನರ ಏಳಿಗೆಗಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹಿಂದುಳಿದ ಸಮುದಾಯಗಳಿಗೆ ದಾರಿದೀಪವಾದರು. ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜವನ್ನು ಕಟ್ಟುವ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಗಣಪತಿ ಹುಲ್ತಿಕೊಪ್ಪ ಹೇಳಿದರು.
ನಾರಾಯಣಗುರುಗಳು ತೋರಿಸಿಕೊಟ್ಟ ಮಾರ್ಗದರ್ಶನ, ತತ್ವ ಹಾಗೂ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ವಿಚಾರಧಾರೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ, ಇಡೀ ಸಮಾಜದ ಉನ್ನತಿಗೆ ದಾರಿದೀಪವಾಗಿದೆ. ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ ಎಂಬುದನ್ನು ಅವರು ತಮ್ಮ ಕಾರ್ಯಗಳ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದರು.
ಈಡಿಗ ಸಮುದಾಯ ಒಗ್ಗಟ್ಟಿನಿಂದ ಮುನ್ನಡೆಯಲಿ
ಶಿವಮೊಗ್ಗ ಜಿಲ್ಲೆಯಲ್ಲಿ ಈಡಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮುದಾಯದ ಅಭಿವೃದ್ಧಿಗೆ ಸಂಘಟನೆಗಳ ನಡುವೆ ಒಗ್ಗಟ್ಟು ಅಗತ್ಯವಾಗಿದೆ ಎಂದು ಅವರು ಹೇಳಿದರು.
Also Read>> ಮೈಸೂರು | ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಸಾಮೂಹಿಕ ರಕ್ಷಾಬಂಧನ ಆಚರಣೆ
ಸೊರಬ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದ ಎಸ್. ಬಂಗಾರಪ್ಪ ಅವರು ಜನಪರ ಆಡಳಿತ ನೀಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅವರ ಪುತ್ರ ಮಧು ಬಂಗಾರಪ್ಪ ಅವರು ಈಡಿಗ ಸಮುದಾಯದ ಕೋಟಾದಡಿ ಸಚಿವರಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಿಗೆ ಕಾರಣರಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.
ಸಮುದಾಯದವರು ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರೂ, ಸಮುದಾಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು. ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜದ ಶ್ರೇಯಸ್ಸಿಗಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಗಣಪತಿ ಹುಲ್ತಿಕೊಪ್ಪ ಕರೆ ನೀಡಿದರು.
ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ನಾಯಕ
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಅಜ್ಜಪ್ಪ ಕಾಸರಗುಪ್ಪೆ ಮಾತನಾಡಿ, ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನರನ್ನು ಮುಖ್ಯವಾಹಿನಿಗೆ ತರುವ, ಅಸ್ಪೃಶ್ಯತೆಯನ್ನು ತೊಲಗಿಸುವ ಹಾಗೂ ಅನಿಷ್ಟ ಸಾಮಾಜಿಕ ಪದ್ಧತಿಗಳ ವಿರುದ್ಧ ಹೋರಾಡಿದ ಮಹಾನ್ ನಾಯಕ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಹೇಳಿದರು.
ಸಾಮಾಜಿಕ ಅಸಮಾನತೆ ಹಾಗೂ ಜಾತಿ ತಾರತಮ್ಯದ ವಿರುದ್ಧ ನಾರಾಯಣಗುರುಗಳು ನಡೆಸಿದ ಹೋರಾಟ ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿದೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದರು.
ಪಟ್ಟಣದ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರುಗಳ ಮೂರ್ತಿಯನ್ನು ಪ್ರತಿಷ್ಠಾಪಿಸುವ ಉದ್ದೇಶ ಹೊಂದಲಾಗಿದೆ. ಈ ಮಹತ್ಕಾರ್ಯವನ್ನು ಸಾಕಾರಗೊಳಿಸಲು ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಸಂಘಟನೆಗಳು ಒಗ್ಗೂಡಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
Soraba : ಹಸೆಚಿತ್ತಾರ ಕಲಾವಿದರಿಗೆ ಸನ್ಮಾನ
ಕಾರ್ಯಕ್ರಮದ ಅಂಗವಾಗಿ ಹಸೆಚಿತ್ತಾರ ಕಲಾವಿದ ವಿಶ್ವನಾಥ ಹೆಚ್ಚೆ ಅವರನ್ನು ಸನ್ಮಾನಿಸಲಾಯಿತು. ನಾರಾಯಣಗುರುಗಳ ಅನುಯಾಯಿಗಳು ಹಾಗೂ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳ ಆದರ್ಶಗಳನ್ನು ಸ್ಮರಿಸಿದರು.
ಜಯಂತಿ ಅಂಗವಾಗಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು. ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ನಾರಾಯಣಗುರುಗಳ ಧರ್ಮ ಪರಿಪಾಲನಾ ಸಂಘದ ತಾಲೂಕು ಅಧ್ಯಕ್ಷ ರಾಜು ಹಿರಿಯಾವಲಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಸಂಸ್ಥಾಪಕ ನಾಗೇಶ ರಾಜೀವನಗರ, ಬಿಎಸ್ಎನ್ಡಿಪಿ ತಾಲೂಕು ಗೌರವಾಧ್ಯಕ್ಷ ನಂಜುಂಡಪ್ಪ ಮಳಲಗದ್ದೆ, ಜಿಲ್ಲಾಧ್ಯಕ್ಷ ಎಸ್.ಡಿ. ನಾಯ್ಕ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಡಿ. ಉಮೇಶ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ದೀವರ ಸಾಂಸ್ಕೃತಿಕ ಅಧ್ಯಯನ ಸಂಸ್ಥೆ ತಾಲೂಕು ಅಧ್ಯಕ್ಷ ಓ.ಬಿ. ರಾಜಶೇಖರಪ್ಪ ಕೆರೆಕೊಪ್ಪ, ಜಿ.ಡಿ. ನಾಯ್ಕ್, ಜಿ.ಡಿ. ಪ್ರಕಾಶ್ ಕೆರೆಕೊಪ್ಪ, ತ್ಯಾಗರಾಜ ಹುಲ್ತಿಕೊಪ್ಪ, ಈಶ್ವರ ಎಂ. ಸಾರೇಮರೂರು, ರವಿ ಶೆಟ್ಟಿ, ಬಿ. ವಸಂತ್ ಕೆರೆಕೊಪ್ಪ, ರಾಮಪ್ಪ ಸಂಪಗೋಡು, ಪ್ರಶಾಂತ್ ಜೆ. ನಾಯ್ಕ್, ಶಿವರಾಜ್ ಸಾರೇಮರೂರು, ರಾಮು ಹಳೇಸೊರಬ, ವಿಶ್ವನಾಥ ಓಟೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








