ಕಲ್ಪ ಮೀಡಿಯಾ ಹೌಸ್
ಸೊರಬ: ರಾಜ್ಯ ಮತ್ತು ಕೇಂದ್ರ ಸರ್ಕಾರ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಜನರಿಗೆ ಸೌಲಭ್ಯಗಳನ್ನು ತಲುಪಿಸುವ ಹೊಣೆಗಾರಿಕೆ ನೌಕರರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣ ಸಮೀಪ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಒಂದು ಕೋಟಿ ರೂ., ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿದ್ದಾರೆ. ನೌಕರರ ಬೇಡಿಕೆಯಂತೆ ಸುಸಜ್ಜಿತ ಭವನ ನಿರ್ಮಾಣಕ್ಕೆ ತಗಲುವ 3 ಕೋಟಿ. ರೂ., ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು. ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಜನತೆಗೆ ತಲುಪಿಸಿ ಸರ್ಕಾರಕ್ಕೆ ಗೌರವ ತರುವ ಕೆಲಸವನ್ನು ನೌಕರರು ಮಾಡಬೇಕಿದೆ ಎಂದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಸ್ಥಳೀಯ ಶಾಸಕರಾದ ಕುಮಾರ್ ಬಂಗಾರಪ್ಪ ಅವರು ಕ್ಷೇತ್ರವನ್ನು ಮಾದರಿಯನ್ನಾಗಿಸುವ ಉದ್ದೇಶ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ನಂಜುಂಡಪ್ಪ ವರದಿ ಪ್ರಕಾರ ಶಿಕಾರಿಪುರ ಮತ್ತು ಸೊರಬ ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿಯಿಂದ ಹೊರಬಂದು ಅಭಿವೃದ್ಧಿ ಪಥದತ್ತ ಸಾಗುತ್ತಿವೆ. ತಾಲೂಕಿನಲ್ಲಿ ಕ್ರೀಯಾಶೀಲ ನೌಕರರ ವರ್ಗವಿದೆ ಎಂದು ಶ್ಲಾಘಿಸಿದರು.
ಶಾಸಕ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿ, ಸಾರ್ವಜನಿಕರು ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯುವುದು ತಪ್ಪಬೇಕು. ಸರ್ಕಾರ ಸೌಲಭ್ಯಗಳು ಪ್ರತಿಯೊಬ್ಬ ಬಡವರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ ಎಂದ ಅವರು, ನೌಕರರ ಭವನ ಪೂರ್ಣಗೊಳ್ಳಲು ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಯತ್ನಿಸುವುದಾಗಿ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಶಿವಾನಂದ ಪಿ. ರಾಣೆ, ಪುರಸಭೆ ಮುಖ್ಯಾಧಿಕಾರಿ ಬಿ. ಮಹೇಂದ್ರ, ಸಂಘದ ರಾಜ್ಯ ಪರಿಷತ್ ಸದಸ್ಯ ಯು. ಸರ್ವಜ್ಞಮೂರ್ತಿ, ಪ್ರಧಾನ ಕಾರ್ಯದರ್ಶಿ ಸಿ.ಪಿ. ಸದಾನಂದ, ಖಜಾಂಚಿ ಸಿ.ಆರ್. ಲಿಂಗರಾಜಪ್ಪ, ನಿರ್ದೇಶಕರಾದ ವೈ.ಎಸ್. ದೀಪಕ್, ಸಂದೀಪ್, ಡಿ. ಮಂಜಪ್ಪ, ಎಚ್.ಆರ್. ರಾಜು, ಎಂ. ಶಿಲ್ಪಾ, ದೀಪಕ್ ದೋಂಗಡೇಕರ್, ಎಲ್. ಚಂದ್ರಾನಾಯ್ಕ್, ಆರ್. ನಟೇಶ್ ಸೇರಿದಂತೆ ವಿವಿಧ ಇಲಾಖೆಯ ನೌಕರರು ಹಾಗೂ ಪದಾಧಿಕಾರಿಗಳು ಇದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post