ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರೈಲ್ವೆ ಕಚೇರಿ ಹಾಗೂ ಕಾರ್ಯಸ್ಥಳಗಳಲ್ಲಿ ಅಗ್ನಿ ಅವಘಡಗಳು (Fie Accident) ಸಂಭವಿಸಿದ ಸಂದರ್ಭದಲ್ಲಿ ಸಿಬ್ಬಂದಿ ಸುರಕ್ಷಿತವಾಗಿ ಹಾಗೂ ತ್ವರಿತವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ರೈಲ್ವೆ (SWR) ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಅಗ್ನಿ ಸುರಕ್ಷತೆ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆ ಕುರಿತು ವಿಶೇಷ ಪ್ರಾಯೋಗಿಕ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಹುಬ್ಬಳ್ಳಿಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ (DRM) ಕಚೇರಿ ಆವರಣದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ರೈಲ್ವೆಯ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ (KSF&ES) ಸಿಬ್ಬಂದಿ ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಕಾರ್ಯಸ್ಥಳಗಳಲ್ಲಿ ಸಂಭವಿಸಬಹುದಾದ ವಿವಿಧ ರೀತಿಯ ಅಗ್ನಿ ಅವಘಡಗಳನ್ನು ಮುನ್ನೆಚ್ಚರಿಕೆ ಕ್ರಮಗಳ ಮೂಲಕ ತಡೆಗಟ್ಟುವ ಕುರಿತು ಸಿಬ್ಬಂದಿಗೆ ವಿವರವಾದ ಮಾಹಿತಿ ನೀಡಲಾಯಿತು. ವಿದ್ಯುತ್ ಉಪಕರಣಗಳ ಬಳಕೆ, ಶಾರ್ಟ್ ಸರ್ಕ್ಯೂಟ್ ಸೇರಿದಂತೆ ಬೆಂಕಿ ಅವಘಡಗಳಿಗೆ ಕಾರಣವಾಗಬಹುದಾದ ಅಂಶಗಳ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವನ್ನು ತಿಳಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆಯೂ ತರಬೇತಿ ನೀಡಲಾಯಿತು.
Also read>> ಏನಿದು ಡೆಡಿಕೇಟೆಡ್ ಫ್ರೈಟ್ ಕಾರಿಡಾರ್? ಭಾರತೀಯ ರೈಲ್ವೆಯಲ್ಲಿ ಕ್ರಾಂತಿಕಾರಕ ಹೆಜ್ಜೆ
SWR : ಸಿಬ್ಬಂದಿಗೆ ಪ್ರಾಯೋಗಿಕ ಅರಿವು
ಅಗ್ನಿ ಅವಘಡ ಸಂಭವಿಸಿದಾಗ ಗಾಬರಿಗೊಳ್ಳದೆ ಸಮಚಿತ್ತದಿಂದ ಪರಿಸ್ಥಿತಿಯನ್ನು ನಿಭಾಯಿಸುವುದು ಅತ್ಯಂತ ಮುಖ್ಯವಾಗಿದ್ದು, ತುರ್ತು ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ (Evacuation) ವಿಧಾನವನ್ನು ಪ್ರಾಯೋಗಿಕವಾಗಿ ವಿವರಿಸಲಾಯಿತು. ಕಟ್ಟಡದಿಂದ ಸುರಕ್ಷಿತವಾಗಿ ಹೊರಬರುವ ಮಾರ್ಗಗಳನ್ನು ಗುರುತಿಸುವುದು, ತುರ್ತು ನಿರ್ಗಮನ ದ್ವಾರಗಳ ಬಳಕೆ ಹಾಗೂ ಅಪಾಯದ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಗೊಂದಲ ಉಂಟಾಗದಂತೆ ಕ್ರಮವಹಿಸುವ ಕುರಿತು ಸಿಬ್ಬಂದಿಗೆ ಅರಿವು ಮೂಡಿಸಲಾಯಿತು.
ತರಬೇತಿಯ ಪ್ರಮುಖ ಭಾಗವಾಗಿ ವಿವಿಧ ರೀತಿಯ ಬೆಂಕಿಯನ್ನು ನಂದಿಸಲು ಬಳಸುವ ಅಗ್ನಿಶಾಮಕ ಉಪಕರಣಗಳ (Fire Extinguishers) ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಯಾವ ರೀತಿಯ ಬೆಂಕಿಗೆ ಯಾವ ಅಗ್ನಿಶಾಮಕ ಉಪಕರಣವನ್ನು ಬಳಸಬೇಕು, ಉಪಕರಣವನ್ನು ಸರಿಯಾದ ರೀತಿಯಲ್ಲಿ ಹೇಗೆ ನಿರ್ವಹಿಸಬೇಕು ಹಾಗೂ ಬೆಂಕಿ ನಂದಿಸುವ ಸಂದರ್ಭದಲ್ಲಿ ಯಾವ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂಬುದನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಾಯೋಗಿಕವಾಗಿ ತೋರಿಸಿಕೊಡಲಾಯಿತು.
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಆರಂಭಿಕ ಹಂತದಲ್ಲೇ ಸೂಕ್ತ ಕ್ರಮ ಕೈಗೊಂಡರೆ ದೊಡ್ಡ ಅನಾಹುತವನ್ನು ತಪ್ಪಿಸಲು ಸಾಧ್ಯವಿದೆ. ಹೀಗಾಗಿ ಪ್ರತಿಯೊಬ್ಬ ಸಿಬ್ಬಂದಿಯೂ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಮೂಲಭೂತ ಜ್ಞಾನ ಹೊಂದಿರಬೇಕು ಎಂದು ತರಬೇತುದಾರರು ತಿಳಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ, ರೈಲ್ವೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ಉಪಸ್ಥಿತರಿದ್ದರು. ತರಬೇತಿ ಕಾರ್ಯಾಗಾರವು ರೈಲ್ವೆ ಕಚೇರಿ ಹಾಗೂ ಕಾರ್ಯಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








