ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬ್ರಾಹ್ಮಣ ಸಮಾಜವನ್ನು ಆರ್ಥಿಕವಾಗಿ ಇನ್ನಷ್ಟು ಸದೃಢಗೊಳಿಸುವ ಉದ್ದೇಶದಿಂದ ಮುಂದಿನ ಐದು ವರ್ಷಗಳಲ್ಲಿ ₹100 ಕೋಟಿ ಆಪತ್ ನಿಧಿ ಸಂಗ್ರಹಿಸುವ ಮಹತ್ವಾಕಾಂಕ್ಷಿ ಗುರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ಹೊಂದಿದೆ ಎಂದು ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್ ತಿಳಿಸಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ, ಸುವರ್ಣ ದಾಂಪತ್ಯ ಸನ್ಮಾನ ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಾಹ್ಮಣ ಸಮಾಜದಲ್ಲಿ ಬಡವರು ಹಾಗೂ ಆರ್ಥಿಕವಾಗಿ ಸ್ಥಿರರಾಗಿರುವವರೂ ಇದ್ದಾರೆ. ಸ್ಥಿತಿವಂತರನ್ನು ಸಂಪರ್ಕಿಸಿ ತಲಾ ₹1 ಲಕ್ಷ ದೇಣಿಗೆ ಸಂಗ್ರಹಿಸುವ ಯೋಜನೆ ರೂಪಿಸಲಾಗಿದೆ. ಈಗಾಗಲೇ ₹85 ಲಕ್ಷ ಸಂಗ್ರಹವಾಗಿದ್ದು, ಗುರಿ ಸಾಧನೆಯವರೆಗೆ ಭಿಕ್ಷೆ ಬೇಡಲು ಸಹ ಸಿದ್ಧನಿದ್ದೇನೆ ಎಂದು ರಘುನಾಥ್ ಹೇಳಿದರು. ಸಂಗ್ರಹವಾಗುವ ನಿಧಿಯನ್ನು ಸಮಾಜದ ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯ ಸೇವೆಗಳಿಗಾಗಿ ಬಳಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಮಹಾಸಭೆಯು ರಾಜ್ಯವನ್ನು 33 ಜಿಲ್ಲೆಗಳಾಗಿ ವಿಭಾಗಿಸಿದ್ದು, ಪ್ರತಿಯೊಂದು ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಲಾ ₹10,000 ವಿದ್ಯಾರ್ಥಿವೇತನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ 198 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಉದ್ದೇಶವಿದ್ದರೂ, 157 ಅರ್ಜಿಗಳು ಮಾತ್ರ ಬಂದಿವೆ ಎಂದು ತಿಳಿಸಿದರು.
Also read>> ರಾಯರ ಮಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ಕೆಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳಿಂದ ಯಾವುದೇ ಅರ್ಜಿ ಸಲ್ಲಿಕೆಯಾಗದಿರುವುದು ಗಮನಾರ್ಹವಾಗಿದೆ. ಇದೇ ವೇಳೆ ನಿವೃತ್ತ ನ್ಯಾಯಾಧೀಶ ಎನ್. ಕುಮಾರ್ ಅವರ ಹೆಸರಿನಲ್ಲಿ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ ₹1,000 ಸಹಾಯಧನ ನೀಡಲಾಗುವುದು. ಒಟ್ಟಾರೆ ಜುಲೈ 31ರೊಳಗೆ 226 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ಕೇಶವಮೂರ್ತಿ, 2004ರಲ್ಲಿ ಪೇಜಾವರ ಶ್ರೀಗಳ ಆಶೀರ್ವಾದದಿಂದ ಸ್ಥಾಪಿತವಾದ ಸಂಘವು ಇದೀಗ 22ನೇ ವರ್ಷಕ್ಕೆ ಕಾಲಿಟ್ಟಿದೆ ಎಂದು ತಿಳಿಸಿದರು.
ಇದುವರೆಗೆ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ 1,800ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದೆ. ಆರ್ಥಿಕ ನೆರವಿನ ಅಗತ್ಯವಿದ್ದ 1,300 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಮಾಡಲಾಗಿದೆ. 50 ವರ್ಷಗಳ ದಾಂಪತ್ಯ ಜೀವನ ನಡೆಸಿದ 100ಕ್ಕೂ ಹೆಚ್ಚು ದಂಪತಿಗಳಿಗೆ ಸನ್ಮಾನ ನೀಡಿ ಗೌರವಿಸಲಾಗಿದೆ. ಒಟ್ಟಾರೆ ₹1.10 ಕೋಟಿ ಮೊತ್ತವನ್ನು ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾನಿಧಿ ರೂಪದಲ್ಲಿ ವಿತರಿಸಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಸಂಘದ ಜಿಲ್ಲಾ ಗೌರವಾಧ್ಯಕ್ಷ ಆರ್. ಅಚ್ಚುತ್ರಾವ್, ಉಪಾಧ್ಯಕ್ಷ ಎಚ್.ಎನ್. ಛಾಯಾಪತಿ, ಕಾರ್ಯದರ್ಶಿ ಬಿ.ಕೆ. ರವೀಂದ್ರನಾಥ್, ಸಂಘಟನಾ ಕಾರ್ಯದರ್ಶಿಗಳಾದ ಎಚ್.ಸಿ. ರವಿಕುಮಾರ್, ಕೆ.ಎನ್. ವಿಶ್ವನಾಥ್, ಕೆ.ಕೆ. ಶಶಿರೇಖಾ, ಲಕ್ಷ್ಮೀ ಶ್ರೀಧರ್, ಎಸ್. ನಾಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








