ಶಿವಮೊಗ್ಗ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ತೋರಿಸಿರುವುದು ಟ್ರೇಲರ್ ಮಾತ್ರ. ನಿಜವಾದ ಪೂರ್ಣ ಸಿನೆಮಾ ಮುಂದಿದೆ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದ್ದಾರೆ.
ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಎನ್’ಇಎಸ್ ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶವನ್ನು ವಿಶ್ವಮಟ್ಟದಲ್ಲಿ ಅಗ್ರಸ್ಥಾನಕ್ಕೆ ಮೋದಿ ಕೊಂಡೊಯ್ಯಲಿದ್ದಾರೆ. ಚೌಕಿದಾರ ಆಗಿ ಮೋದಿ ಪಾಕಿಸ್ಥಾನಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಇಂತಹ ನಾಯಕ ನಮಗೆ ಬೇಕೇ ವಿನಾ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತರಹದ ನಾಯಕರಲ್ಲ ಎಂದರು.
ವಿಶ್ವಮಟ್ಟದಲ್ಲಿ ಮೋದಿ ಗಳಿಸಿರುವ ಪ್ರಸಿದ್ದಿ ಹಾಗೂ ರಕ್ಷಣಾ ಕಾರ್ಯದಲ್ಲಿ ಮಾಡಿದ ಸಾಧನೆ ಸಹಿಸದ ಕಾಂಗ್ರೆಸ್ ಅವರನ್ನು ಚೌಕಿದಾರ್ ಅಲ್ಲ ಚೋರ್ ಎನ್ನುತ್ತಿದೆ. ಆದರೆ, ನಿಜವಾದ ಚೋರ್ ಕಾಂಗ್ರೆಸ್’ನ ಸೋನಿಯಾಗಾಂಧಿ ಅವರು ನ್ಯಾಶನಲ್ ಹೆರಾಲ್ಡ್ ಹಗರಣದಲ್ಲಿ ಬೇಲ್ ಪಡೆದು ಹೊರಗಿದ್ದಾರೆ ಎಂದು ಕುಟುಕಿದರು.
ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ. ರಾಜ್ಯದಲ್ಲಿ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟಿಸಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ತೋರಿಸುವ ನಿಟ್ಟಿನಲ್ಲಿ ಶಿವಮೊಗ್ಗದಿಂದ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
ಸಭೆಯಲ್ಲಿ ಡಿ.ಎಚ್. ಶಂಕರ ಮೂರ್ತಿ, ಕೆ.ಎಸ್. ಈಶ್ವರಪ್ಪ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಡಾಳ್ ವಿರೂಪಾಕ್ಷಪ್ಪ, ಬಸವನಗೌಡ ಪಾಟೀಲ್ ಯತ್ನಾಳ್, ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ, ಅಶೋಕ್ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Discussion about this post