ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್’ಆರ್’ಟಿಸಿ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಿದೆ.
ಈ ಕುರಿತಂತೆ ಮಾತನಾಡಿದ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ, ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಅತ್ಯುತ್ತಮವಾದ ಯೋಜನೆಯಾಗಿದ್ದು, ಅಪಘಾತ ವಿಮಾ ಯೋಜನೆಯಾಗಿರುವುದು ಸಿಬ್ಬಂದಿಗಳಿಗೆ ಮತ್ತಷ್ಟು ಅನುಕೂಲವಾಗಲಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಈ ಯೋಜನೆಗೆ ತುಂಬು ಹೃದಯದ ಸಹಕಾರ ನೀಡಿದ ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಮುಖಂಡರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಸಹಯೋಗವನ್ನು ಶ್ಲಾಘಿಸಿದರು.
ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕರು ಹಾಗೂ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆಎಸ್’ಆರ್’ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಯುನೈಟೆಡ್ ಇಂಡಿಯಾ ಇನ್ಷೂರೆನ್ಸ್ ಪ್ರಧಾನ ವ್ಯವಸ್ಥಾಪಕ ಅಂಗ್ರೂಪ್ ಸೋನಂ ಅವರು ಒಡಂಬಡಿಕೆಗೆ ಸಹಿ ಹಾಕಿದರು.
ಡಾ. ನವೀನ್ ಭಟ್ ವೈ, ನಿರ್ದೇಶಕರು (ಸಿಬ್ಬಂದಿ ಜಾಗೃತ) ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರುಗಳಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಸಂಘಗಳ ಮುಖಂಡರುಗಳು , ಉಷಾ ಚಂದ್ರಮೌಳಿ, ಪ್ರಾದೇಶಿಕ ವ್ಯವಸ್ಥಾಪಕರು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ಬೆಂಗಳೂರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಬ್ಬಂದಿಗಳು ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ. ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯೊಂದಿಗೆ ಮಾಡಿಕೊಂಡಿದೆ. ಕೆಲವು ದಿನಗಳಷ್ಟು ಹಿಂದೆಯಷ್ಟೇ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾರವರೊಡನೆ ಸಹಿ ಹಾಕಿರುವ ಒಡಂಬಡಿಕೆಯು ಕಾರ್ಮಿಕರ ಹಿತ ಕಾಪಾಡುವಲ್ಲಿ ಚರಿತಾರ್ಹವಾದ ಕ್ಷಣಕ್ಕೆ ಸಾಕ್ಷಿಯಾಗಿದೆ.
ವಿಮೆಯ ವಿಶೇಷತೆಗಳೇನು?
- ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿದೆ. ಇದರ ಮುಂದುವರಿದ ಭಾಗವಾಗಿ, ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು , ಅದರಂತೆ ಸಿಬ್ಬಂದಿಗಳಿಗೆ ರೂ.50 ಲಕ್ಷದವರೆಗೆ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ.
- ಈ ವಿಮಾ ಯೋಜನೆಗೆ ಸಿಬ್ಬಂದಿಗಳು ಮಾಹೆಯಾನ ರೂ.62.50 + ಜಿಎಸ್’ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.
- ಈ ಯೋಜನೆಯಲ್ಲಿ ಸಿಬ್ಬಂದಿಗಳು ಪ್ರತಿ ಮಾಹೆ ರೂ.62.50 + ಜಿ ಎಸ್ ಟಿ ಸೇರಿ ಪ್ರೀಮಿಯಂ (ವಾರ್ಷಿಕ ರೂ.750+ ಜಿಎಸ್’ಟಿ ಸೇರಿದಂತೆ ಒಟ್ಟು ರೂ.885/-) ಪಾವತಿಸಬೇಕಾಗುತ್ತದೆ.
- ಈ ವೈಯಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂ.ಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.
- ಅಪಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗ ವೈಕಲ್ಯಕ್ಕೆ ತುತ್ತಾದಲ್ಲಿ ಸಹ ರೂ. 50 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.
- ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.
- ಒಂದು ವೇಳೆ ಸಿಬ್ಬಂದಿಯು ಅಪಘಾತಕ್ಕೆ ಒಳಗಾಗಿ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅಸಮರ್ಥನಾದ ಪಕ್ಷದಲ್ಲಿ, ಆತನು ಚೇತರಿಸಿಕೊಳ್ಳುವವರೆಗೆ, ಅವನಿಗೆ ವಿಮಾ ಮಾಡಲಾದ ರೂ.50 ಲಕ್ಷ ಮೊತ್ತದ ಶೇ.1ರಷ್ಟು ಮೊತ್ತವನ್ನು ಪ್ರತಿವಾರ ರೂ.5000 ಕ್ಕೆ ಹೆಚ್ಚದಂತೆ ಅಥವಾ ಅವರ ಮಾಸಿಕ ಸಂಬಳದ ಶೇಕಡಾ 25ರಷ್ಟನ್ನು, ಯಾವುದು ಕಡಿಮೆಯೋ ಅದನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡುತ್ತದೆ.
- ಈ ಎರಡು ವಿಮಾ ಯೋಜನೆಗಳಿಂದ ನಿಗಮವು ತನ್ನ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಂತಾಗಿದೆ. ಇಲ್ಲಿಯವರೆಗೂ ನಿಗಮದ ಸಿಬ್ಬಂದಿಗಳಿಗೆ ಯಾವುದೇ ಅಪಘಾತ ವಿಮಾ ಯೋಜನೆಯ ಸೌಲಭ್ಯವಿರಲಿಲ್ಲ.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post