ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬಹುದಿನಗಳಿಂದ ಸ್ಥಗಿತಗೊಂಡಿದ್ದ ಶಾಲೆಗಳು ಸರ್ಕಾರದ ಸೂಚನೆಯನ್ವಯ 2021ರ ಜ.1ರಿಂದ ಆರಂಭಗೊಳ್ಳಲಿವೆ. ನಡೆಯುವ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಯೋಗ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೋರೋನ ಮಹಾಮಾರಿಯಿಂದ ರಕ್ಷಣೆ ಹೊಂದಲು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿರುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಗಶಿಕ್ಷಣ ಸಹಕಾರಿಯಾಗಲಿರುವುದಾಗಿ ತಿಳಿಸಿದ ಅವರು, ಈಗಾಗಲೇ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಯೋಗಕೇಂದ್ರಗಳಿಂದ ತರಬೇತಿ ಪಡೆದ ಶಿಕ್ಷಕರನ್ನು ಈ ತರಗತಿಗಳ ನಿರ್ವಹಣೆಗಾಗಿ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.
ಇನ್ನು ಕೆಲವು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇರುವ ಹಿನ್ನೆಲೆಯಲ್ಲಿ ಸಂಭಾವನೆ ರಹಿತವಾಗಿ ಸ್ವಯಂಪ್ರೇರಿತವಾಗಿ ಯೋಗ ತರಬೇತಿ ನೀಡಲಿಚ್ಚಿಸುವ ತರಬೇತುದಾರರನ್ನು ಕೋರಲಾಗುವುದು. ಈ ಸಂಬಂಧ ಡಿ.31ರಂದು ಶಿಕ್ಷಕರಿಗೆ ಯೋಗಶಿಕ್ಷಣ ತರಬೇತಿ ನೀಡಲಾಗುವುದಲ್ಲದೆ 30 ನಿಮಿಷಗಳ ಅವಧಿಯ ಯೋಗಶಿಕ್ಷಣ ಪಠ್ಯಕ್ರಮವನ್ನು ನಿಗಧಿಪಡಿಸಲಾಗುವುದು ಎಂದರು.
ಜ.1ರಿಂದ ಪ್ರತಿದಿನ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಎಸ್.ಎಸ್.ಎಲ್.ಸಿ ತರಗತಿಗಳು ನಡೆಯಲಿವೆ. 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ತರಗತಿಗಳು ದಿನಬಿಟ್ಟು ದಿನ ಮಧ್ಯಾಹ್ನದಿಂದ ಸಂಜೆಯವರೆಗೆ ನಡೆಯಲಿವೆ. ಈ ನಡುವೆ ಸಮಯದ ಹೊಂದಾಣಿಕೆ ಮಾಡಿಕೊಂಡು ಯೋಗಶಿಕ್ಷಣ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಒಂದರಿಂದ ಐದನೆ ತರಗತಿಗಳನ್ನು ನಡೆಸಲು ಸರ್ಕಾರದ ಮಾರ್ಗಸೂಚಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ಕಳೆದ ಮಳೆಗಾಲದಲ್ಲಿ ಶಿವಮೊಗ್ಗ ನಗರದಲ್ಲಿನ ಆಯ್ದ ಶಾಲೆಗಳಲ್ಲಿ ಶೌಚಾಲಯಗಳು ಶಿಥಿಲವಾಗಿದ್ದು ಅವುಗಳನ್ನು ಪುನರ್ ನಿರ್ಮಿಸಲು ನೆಲಸಮಗೊಳಿಸಲಾಗಿದೆ. ಅಂತಹ ಶಾಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಾತ್ಕಾಲಿಕ ಶೌಚಾಲಯಗಳನ್ನು ಕಲ್ಪಿಸುವಂತೆ ಸಚಿವರು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಜ.1ರಿಂದ ಆರಂಭವಾಗುತ್ತಿರುವ ಶಾಲೆಗೆ ಪೋಷಕರು ತಮ್ಮ ಮಕ್ಕಳನ್ನು ಶೈಕ್ಷಣಿಕ ಹಿತದೃಷ್ಠಿಯಿಂದ ಸುರಕ್ಷತೆಯೊಂದಿಗೆ ಕಳುಹಿಸುವಂತೆ ಮನವಿ ಮಾಡಿದ ಅವರು ಶಾಲೆಗೆ ತೆರಳುವ ಮಕ್ಕಳ ಅಗತ್ಯಗಳಿಗೆ ತಕ್ಕಂತೆ ಬಸ್ ಸಂಪರ್ಕ ಕಲ್ಪಿಸಲು, ವಸತಿ ಶಾಲೆ, ಶಾಲಾ ಆವರಣದಲ್ಲಿ ಸ್ಯಾನಿಟೈಜರ್ ಮುಂತಾದ ಅಗತ್ಯ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲೆಯ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ 340 ಅಂಗನವಾಡಿ ಕೇಂದ್ರಗಳನ್ನು ದುರಸ್ತಿಗೊಳಿಸಲು ಈಗಾಗಲೇ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ 126 ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಬೇಡಿಕೆ ಇದ್ದು, ಅವುಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ. ಅಂತೆಯೇ ನಗರದಲ್ಲಿನ ಶಾಸಕರ ದತ್ತು ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯವನ್ನು ಒದಗಿಸಲು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿರು.
ಕೊರೋನಾ
ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ 39ಕೋರೋನ ಬಾಧಿತರು ಚಿಕತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಇತ್ತೀಚಿಗೆ ಬ್ರಿಟನ್ನಿಂದ ಬಂದ 23ಜನರನ್ನು ಗುರುತಿಸಿ ಅವರ ಆರೋಗ್ಯ ಪ್ರಾಥಮಿಕ ಹಂತದ ತಪಾಸಣೆ ನಡೆಸಲಾಗಿದೆ ಅಲ್ಲದೆ ರೂಪಾಂತರಗೊಂಡ ಸೋಂಕು ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬೋರೇಟರಿಗೆ ರವಾನಿಸಲಾಗಿದ್ದು, ಅದರ ವರದಿ ನಾಳೆ ಸಂಜೆ ಬರುವ ನಿರೀಕ್ಷೆ ಇದೆ ಎಂದರು.
ಮೆಗ್ಗಾನ್ ಆಸ್ಪತ್ರೆ ಮತ್ತು ಬೋಧನಾ ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಕಾರ್ಯನಿರ್ವಹಣೆ ಕುರಿತು ಸಾರ್ವಜನಿಕ ವಲಯದಿಂದ ಗಂಭೀರಸ್ವರೂಪದ ಅನೇಕ ದೂರುಗಳು ಕೇಳಿಬರುತ್ತಿವೆ. ಅದರ ನ್ಯೂನತೆಗಳ ಹಾಗೂ ವಾಸ್ತವತೆಯನ್ನು ತಿಳಿಯಲು ಸಿಮ್ಸ್ ಆಡಳಿತಾಧಿಕಾರಿಗಳಿಂದ ವರದಿ ಪಡೆದು ಕ್ರಮಕೈಗೊಳ್ಳಲಾಗುವುದು ಎಂದರು.
ಕೊರೋನಾ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜ.1ರವರೆಗೆ ಪ್ರತಿದಿನ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ವಿಧಿಸಲಾಗಿದ್ದು, ಬಾರ್, ವೈನ್ಸ್ಗಳನ್ನು ಕಡ್ಡಾಯವಾಗಿ ಬಂದ್ ಮಾಡಿಸಲಾಗುವುದಲ್ಲದೆ ಅನಗತ್ಯವಾಗಿ ಸಂಚಾರವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಸೋಂಕಿನ ನಿಯಂತ್ರಣ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರವು ಈಗಾಗಲೇ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post