ಕಲ್ಪ ಮೀಡಿಯಾ ಹೌಸ್ | ವಿಜಯನಗರ |
ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಫೆಬ್ರವರಿ 13, 14 ಮತ್ತು 15ರಂದು ‘ಹಂಪಿ ಉತ್ಸವ–2026’ ಅದ್ದೂರಿಯಾಗಿ ಜರುಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಉತ್ಸವದ ಸಿದ್ಧತೆಗಳು ಹಾಗೂ ವಿಶೇಷತೆಗಳ ಕುರಿತು ವಿವರವಾದ ಮಾಹಿತಿ ನೀಡಿದರು.
ಫೆಬ್ರವರಿ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯ ದಿನದಂದು ಮುಖ್ಯಮಂತ್ರಿಗಳು ಹಂಪಿಯಲ್ಲೇ ವಾಸ್ತವ್ಯ ಹೂಡಲಿದ್ದು, ಮರುದಿನ ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.
ಹಂಪಿ ಉತ್ಸವದ ಅಂಗವಾಗಿ ಆರು ವೇದಿಕೆಗಳಲ್ಲಿ ಸಾಂಸ್ಕೃತಿಕ ಸೌರಭ ನಡೆಯಲಿದೆ. ಉತ್ಸವಕ್ಕಾಗಿ ಎಂ.ಪಿ. ಪ್ರಕಾಶ್ ವೇದಿಕೆ, ಶ್ರೀಕೃಷ್ಣದೇವರಾಯ (ಎದುರು ಬಸವಣ್ಣ) ವೇದಿಕೆ, ಸಾಸಿವೆಕಾಳು ಗಣಪ ವೇದಿಕೆ, ವಿದ್ಯಾರಣ್ಯ (ಮಹನಾವಮಿ ದಿಬ್ಬ) ವೇದಿಕೆ ಹಾಗೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೇದಿಕೆ ಸೇರಿದಂತೆ ಒಟ್ಟು ಆರು ಬೃಹತ್ ವೇದಿಕೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.
ಎಂ.ಪಿ. ಪ್ರಕಾಶ್ ವೇದಿಕೆ ಪ್ರಧಾನ ವೇದಿಕೆಯಾಗಿದ್ದು, ಇಲ್ಲಿ 50,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ 8 ರಿಂದ 10 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, 15 ಸಾವಿರ ಆಸನಗಳನ್ನು ಕಾಯ್ದಿರಿಸಲಾಗಿದೆ ಎಂದರು.
ತಾರಾ ಮೆರುಗು
ಈ ಬಾರಿಯ ಉತ್ಸವದಲ್ಲಿ ಸ್ಯಾಂಡಲ್ವುಡ್ನ ಖ್ಯಾತ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ರಕ್ಷಿತ್ ಶೆಟ್ಟಿ, ರಚಿತಾ ರಾಮ್, ಡಾಲಿ ಧನಂಜಯ್ ಮತ್ತು ಬಿಗ್ ಬಾಸ್ ವಿಜೇತ ಗಿಲ್ಲಿನಟ ಭಾಗವಹಿಸುವುದು ಖಚಿತವಾಗಿದೆ ಎಂದು ತಿಳಿಸಿದರು.
ವಿಶೇಷ ಆಕರ್ಷಣೆಯ ವಿದ್ಯುತ್ ದೀಪಾಲಂಕಾರ
ಹಂಪಿ ಹಾಗೂ ಸುತ್ತಮುತ್ತಲಿನ ಸುಮಾರು 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಶೇಷ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇಡೀ ಹಂಪಿ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ.
ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ಉಂಟಾಗದಂತೆ ಭದ್ರತಾ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ ಒಬ್ಬ ಎಸ್ಪಿ, 8 ಅಡಿಷನಲ್ ಎಸ್ಪಿ, 15 ಡಿವೈಎಸ್ಪಿ ಹಾಗೂ 61 ಇನ್ಸ್ಪೆಕ್ಟರ್ಗಳು ಒಳಗೊಂಡಿದ್ದಾರೆ.
ಧ್ವನಿ ಮತ್ತು ಬೆಳಕು ಕಾರ್ಯಕ್ರಮ
ಹಕ್ಕ-ಬುಕ್ಕರ ಇತಿಹಾಸವನ್ನು ಸಾರುವ ವಿಶೇಷ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಆಯೋಜಿಸಲಾಗಿದೆ. ಉತ್ಸವ ಮುಗಿದ ಬಳಿಕವೂ ಈ ಕಾರ್ಯಕ್ರಮ 7 ದಿನಗಳ ಕಾಲ ಮುಂದುವರಿಯಲಿದೆ ಎಂದು ತಿಳಿಸಿದರು.
ಉಚಿತ ಊಟದ ವ್ಯವಸ್ಥೆ
ಭಕ್ತಾದಿಗಳು ಮತ್ತು ಸಾರ್ವಜನಿಕರಿಗಾಗಿ ಕೃಷ್ಣ ದೇವಸ್ಥಾನದ ಬಳಿ ಸರ್ಕಾರದಿಂದ ಉಚಿತ ಊಟ ಮತ್ತು ತಿಂಡಿ ವ್ಯವಸ್ಥೆ ಮಾಡಲಾಗಿದೆ. ಉತ್ಸವಕ್ಕಾಗಿ ಸುಮಾರು 14 ರಿಂದ 15 ಕೋಟಿ ರೂಪಾಯಿ ಬಜೆಟ್ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಎಸ್ಪಿ ಜಾಹ್ನವಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯನಗರ ಬೈಕ್ ರ್ಯಾಲಿ
ಉತ್ಸವದ ಅಂಗವಾಗಿ ಇಂದು ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಸ್ವತಃ ಬೈಕ್ನಲ್ಲಿ ಪಾಲ್ಗೊಂಡು ಅಧಿಕೃತ ಚಾಲನೆ ನೀಡಿದರು.
ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ರ್ಯಾಲಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಬೈಕ್ಗಳು ಭಾಗವಹಿಸಿತು. ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾದ ರ್ಯಾಲಿ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ, ಅನಂತಶಯನಗುಡಿ, ಕೊಂಡನಾಯಕನಹಳ್ಳಿ, ಮಲಪನಗುಡಿ, ಗಾಳೆಮ್ಮನಗುಡಿ ಹಾಗೂ ಕಡ್ಡಿರಾಂಪುರ ಮಾರ್ಗವಾಗಿ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದವರೆಗೆ ಯಶಸ್ವಿಯಾಗಿ ತಲುಪಿತು.
ರ್ಯಾಲಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಷಾ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಸ್ಥಳೀಯ ಕಲಾವಿದರಿಗೆ ಆದ್ಯತೆ
ಸ್ಥಳೀಯ ಕಲಾವಿದರ ಪಟ್ಟಿಯನ್ನೂ ಇದೇ ದಿನ ಬಿಡುಗಡೆ ಮಾಡಲಾಗಿದ್ದು, ಅವರಿಗೆ ಉತ್ಸವದ 6 ವೇದಿಕೆಗಳಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಿ ಕಾರ್ಯಕ್ರಮ ನೀಡಲು ಅವಕಾಶ ಕಲ್ಪಿಸಲಾಗಿದೆ.
(ವರದಿ: ಮುರುಳೀಧರ್ ನಾಡಿಗೇರ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















