ನವದೆಹಲಿ: ದೇಶದ ಐತಿಹಾಸಿಕ ನಿರ್ಧಾರವೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ತ್ರಿವಳಿ ತಲಾಖ್ ಅನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಅಸ್ತು ಎಂದಿದೆ.
ಈ ಕುರಿತಂತೆ ಇಂದು ನಡೆದ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ಸಂಸತ್ ನ ಎರದೂ ಸದನಗಳಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಅಂಗೀಕರಿಸುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದೆ.
ಸುಗ್ರೀವಾಜ್ಞೆಯಂತೆ, ತ್ರಿವಳಿ ತಲಾಖ್ ನೀಡುವ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಈಗಾಗಲೇ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರಗೊಂಡಿದ್ದು, ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿರುವ ಅಂಶಗಳಿಗೆ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷಗಳು ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಅವಕಾಶ ನೀಡಿರಲಿಲ್ಲ.
ಪ್ರತಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ, ಮುಸ್ಲಿಂ ಮಹಿಳೆಯರ ವಿವಾಹ, ರಕ್ಷಣಾ ಮಸೂದೆಗೆ ಮೂರು ಪ್ರಮುಖ ತಿದ್ದುಪಡಿಗಳನ್ನು ಆಗಸ್ಟ್ನಲ್ಲಿ ತಂದಿತ್ತು. ಈ ತಿದ್ದುಪಡಿ ಪ್ರಕಾರ ತ್ರಿವಳಿ ತಲಾಖ್ ನೀಡುವುದು ಜಾಮೀನು ರಹಿತವಾದ ಅಪರಾಧವಾಗಲಿದ್ದು, ಮೂರು ವರ್ಷಗಳ ಶಿಕ್ಷೆ ವಿಧಿಸಲಾಗುತ್ತದೆ.















