ಕಲ್ಪ ಮೀಡಿಯಾ ಹೌಸ್ | ವಿಜಯನಗರ(ಹೊಸಪೇಟೆ) |
ರಾಜ್ಯದಲ್ಲಿ ಕೋವಿಡ್ Covid ಮೂರನೇ ಅಲೆಯು ಪ್ರಾರಂಭವಾಗುತ್ತಿದ್ದು, ಸಾರ್ವಜನಿಕರು ಮಾಸ್ಕ್ ತಪ್ಪದೇ ಧರಿಸಬೇಕು ಹಾಗೂ ಸಾರ್ವಜನಿಕರು ಗುಂಪು ಸೇರದೇ ಬೂಸ್ಟರ್ ಡೋಸ್ನ್ನು ಪಡೆದುಕೊಂಡು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹೇಳಿದರು.
ಸೋಮವಾರದಂದು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕೋವಿಡ್-19ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಬೂಸ್ಟರ್ ಡೋಸ್ ಲಸಿಕೆಯನ್ನು ಸಾರ್ವಜನಿಕರು ಸೇರಿದಂತೆ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಕಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಎಲ್ಲಾ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ಔಷಧ ದಾಸ್ತಾನುಗಳು, ಆಕ್ಸಿಜನ್ ಸಿಲಿಂಡರ್ಗಳು ಮತ್ತು ವೆಂಟಿಲೇಟರ್ಸ್ ಸಹಿತ ಬೇಡ್ಗಳು ಸೇರಿದಂತೆ ಇನ್ನೂ ಅವಶ್ಯಕವಾದ ಸಾಮಾಗ್ರಿಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳಲು ಸೂಚಿಸಿದರು.
ಐ.ಎಲ್.ಐ ಮತ್ತು ಎಸ್.ಎ.ಆರ್.ಐ ಪ್ರಕರಣಗಳಿಗೂ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಎಲ್ಲಾ ವೈದ್ಯಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಿದರು.
ಸಾರ್ವಜನಿಕ ಸ್ಥಳ, ಸಂತೆ, ಮತ್ತು ಶಾಲಾ-ಕಾಲೇಜುಗಳಲ್ಲಿ ಎಲ್ಲಾರು ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಲು ಅವರು ಸೂಚಿಸಿದರು.
ಕೆಮ್ಮು, ಶೀತ, ಜ್ವರ ಕಂಡುಬಂದಲ್ಲಿ ಹತ್ತಿರದ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಅವರು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾಳೆ ನಡೆಯಲಿರುವ ಮಾಕ್ ಡ್ರೀಲ್ಗಳಿಗೆ ಸಹಾಯಕ ಆಯುಕ್ತರು, ತಹಶೀಲ್ದಾರರು, ಭೇಟಿ ನೀಡಿ ಮೇಲ್ವಿಚಾರಣೆ ಮಾಡಬೇಕು ಎಂದು ಅವರು ಹೇಳಿದರು.
ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ಅಗತ್ಯ ಅನುಸಾರ ರಾಜ್ಯ ಮಟ್ಟದಿಂದ ಚರ್ಚಿಸಿ ಅತಿ ಶೀಘ್ರವಾಗಿ ತರೆಸಿಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಲೀಂ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಜಂಭಯ್ಯ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















