ನವದೆಹಲಿ: ಭಾರತ ಹಾಗೂ ಪಾಕಿಸ್ಥಾನದ ನಡುವೆ ಆರಂಭವಾಗಿರುವ ಕಿತ್ತಾಟ ವಿಕೋಪದ ಹಂತಕ್ಕೆ ಹೋಗಿರುವ ಹಿನ್ನೆಲೆಯಲ್ಲಿ, ದೇಶದ ರಕ್ಷಣೆಗಾಗಿ ಯಾವುದೇ ಕ್ಷಣದಲ್ಲಿ ಯುದ್ಧ ಘೋಷಣೆಯಾದರೂ ಆಗಬಹುದು ಎಂಬ ಸೂಚನೆಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪಾಕ್ ವಿಮಾನಗಳು ನಮ್ಮ ದೇಶದ ಗಡಿಯೊಳಗೆ ಪ್ರವೇಶ ಮಾಡಿ ದಾಳಿ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಅವುಗಳನ್ನು ಹೊಡೆದು ಉರುಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಗಗಳು ನಡೆಯುತ್ತಿದ್ದು, ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಸಂಭವಿಸಬಹುದು ಎಂದು ಹೇಳುವ ಮೂಲಕ ಯುದ್ಧ ಘೋಷಣೆಯ ಮುನ್ಸೂಚನೆ ನೀಡಿದ್ದಾರೆ.
ಇದೇ ವೇಳೆ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ದೇಶದ ಎಲ್ಲ ರಾಜ್ಯಗಳ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದು, ಯಾವುದೇ ಸಂದರ್ಭವನ್ನು ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಜೊತೆಯಲ್ಲಿ, ಭಾರತೀಯ ಎಲ್ಲ ವಾಯು ನೆಲೆಗಳಲ್ಲಿ ಯುದ್ಧ ವಿಮಾನಗಳನ್ನು ಸರ್ವ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ವಿಮಾನವನ್ನು ಹಾರಿಸಲು ರನ್ ವೇನಗಳಲ್ಲೆ ಹಲವು ವಿಮಾನಗಳು ಸಿದ್ದವಾಗಿ ನಿಂತಿವೆ.
ಇದೇ ವೇಳೆ ರಜೆಯಲ್ಲಿದ್ದ ಭಾರತೀಯ ಸೇನೆಯ ಎಲ್ಲ ಯೋಧರಿಗೆ ತತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೇನೆ ಸೂಚನೆ ನೀಡಿದೆ.















