ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಆಶ್ರಯ ಯೋಜನೆಯಡಿಯಲ್ಲಿ ಮನೆಗಳು ಮತ್ತು ಇತರ ಸರ್ಕಾರಿ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಎಲ್ಲಾ ಸಮುದಾಯದ ಬೀದಿ ಬದಿ ವ್ಯಾಪಾರಿಗಳು ಕಡು ಬಡವ, ನಿರ್ಗತಿಕರಾಗಿದ್ದು, ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಕಷ್ಟಪಟ್ಟು ಬೀದಿ ಬದಿ ವ್ಯಾಪಾರ ಮಾಡಿಕೊಂಡು ತಮ್ಮ ಜೀವನ ನಿರ್ವಹಿಸುತ್ತಿದ್ದಾರೆ. ಇವರಿಗೆ ಸ್ವಂತ ಮನೆಗಳಿರುವುದಿಲ್ಲ. ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು, ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಒದಗಿಸುವ ರೀತಿಯಲ್ಲಿ ಸೌಲಭ್ಯಗಳು ಮತ್ತು ಸಹಾಯಧನ ಸಿಗುತ್ತಿಲ್ಲ. ಆದ್ದರಿಂದ ಜಿಲ್ಲೆಯ ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ಸಂವಿಧಾನ ಬದ್ಧವಾದ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರತ್ಯೇಕ ಜಾಗವನ್ನು ಕಲ್ಪಿಸಿಕೊಡಬೇಕು.
ಗುರುತಿನ ಕಾರ್ಡ್ ವಿತರಿಸಿ ಅವರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ವೈದ್ಯಕೀಯ ಸೌಲಭ್ಯ, ಬಾಣಂತಿಯರಿಗೆ ಸಹಾಯಧನ, ವೃದ್ದಾಪ್ಯ ವೇತನ, ಅಂಗವಿಕಲ ವೇತನ, ವಿವಾಹಕ್ಕೆ ಸಹಾಯ ಧನ ಹಾಗೂ ಆಶ್ರಯ ಯೋಜನೆಯಲ್ಲಿ ಮನೆಗಳನ್ನು ನೀಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮಣಿಗೌಂಡರ್, ಕಾರ್ಯಾಧ್ಯಕ್ಷ ಎಸ್.ಪಿ.ಅಶೋಕ್ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ದಿನೇಶ್, ಜಾನವಿ, ನವೀನ್ಕುಮಾರ್, ಗೌರಮ್ಮ, ಉಷಾ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















