ಶ್ರೀನಗರ: ಕಣವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅಸ್ಥಿತ್ವದಲ್ಲಿದ್ದ ಮೈತ್ರಿಯನ್ನು ಬಿಜೆಪಿ ಮುರಿಯುವ ಸನ್ನಿವೇಶ ಎದುರಾಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬಿಜೆಪಿ ಮುಖಂಡ ರಾಮ್ ಮಾಧವ್, ಪಿಡಿಪಿ ಜೊತೆಯಲ್ಲಿ ಕಣಿವೆ ರಾಜ್ಯದಲ್ಲಿ ಮೈತ್ರಿ ಮುಂದುವರೆಸುವ ಸನ್ನಿವೇಶಗಳು ಇಲ್ಲ. ಈ ಹಿನ್ನೆಲೆಯಲ್ಲಿ ಮೈತ್ರಿಯನ್ನು ಅಂತ್ಯ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ರಾಷ್ಟ್ರಪತಿ ಆಡಳಿತ ಜಾರಿಗೆ ಬರುವ ನಿರೀಕ್ಷೆಯಿದೆ. ರಂಜಾನ್ ಮುಗಿದೊಡನೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕೇಂದ್ರ ಸರ್ಕಾರದ ನಿರ್ಧಾರ ಪಿಡಿಪಿ ಮುಖ್ಯಸ್ಥೆ ಮತ್ತು ಸಿಎಂ ಮೆಹಬೂಬ ಮುಫ್ತಿ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಇಂತಹ ನಿರ್ಧಾರಕ್ಕೆ ಬಂದಿದೆ.
ಇದರ ಬೆನ್ನಲ್ಲೇ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನವದೆಹಲಿಯಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಬಿಜೆಪಿ ಶಾಸಕರು ಮತ್ತು ರಾಜ್ಯ ಘಟಕದ ನಾಯಕರೊಂದಿಗೆ ಇಂದು ಸಭೆ ನಡೆದಿದೆ.
ವರದಿಗಳ ಪ್ರಕಾರ ಅಮಿತ್ ಶಾ ಅವರು ಸಭೆಯಲ್ಲಿ ಜಮ್ಮು ಕಾಶ್ಮೀರದ ರಾಜಕೀಯ ಮತ್ತು ಭದ್ರತಾ ಸ್ಥಿತಿಗತಿಯನ್ನು ಚರ್ಚಿಸಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಯೋಧ ಔರಂಗಜೇಬ್ ಮತ್ತು ರೈಸಿಂಗ್ ಕಾಶ್ಮೀರ ಪತ್ರಿಕೆ ಮುಖ್ಯ ಸಂಪಾದಕ ಶುಜಾತ್ ಭುಕಾರಿ ಅವರ ಹತ್ಯೆ ನಡೆದ ಕಾರಣ ರಂಜಾನ್ ಮುಗಿದ ಬೆನ್ನಿಗೇ ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿನ ಉಗ್ರ ನಿಗ್ರಹ ಸೇನಾ ಕಾರ್ಯಾಚರಣೆಯನ್ನು ಪುನಾರಂಭಿಸಲು ನಿರ್ಧರಿಸಿತ್ತು ಎನ್ನುವುದನ್ನು ಇಲ್ಲಿ ಉಲ್ಲೇಖಿಸಬಹುದು.
Discussion about this post