ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ಹಾಗೂ ಪುರದಾಳ ಡ್ಯಾಂ ಸುತ್ತಮುತ್ತಲಿನ ಸಂರಕ್ಷಿತ ಪ್ರದೇಶಗಳಲ್ಲಿ ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮತ್ತು ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ ಕೈಗೊಂಡಿದೆ.
ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದ್ದ ಕೆಲವು ವಿಡಿಯೋಗಳ ಆಧಾರದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಅಭಯಾರಣ್ಯದೊಳಗೆ ನಿಯಮ ಉಲ್ಲಂಘಿಸಿ ಚಿತ್ರೀಕರಣ ನಡೆಸಿರುವುದು ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದ ಕಾಡುಹಂದಿ ಸಂಬಂಧಿತ ವಿಡಿಯೋ ಕೂಡ ಪ್ರಕರಣದ ವ್ಯಾಪ್ತಿಗೆ ಸೇರಿದೆ ಎಂದು ತಿಳಿದುಬಂದಿದೆ.
ಯುವಕರು ವಿದ್ಯಾರ್ಥಿಗಳಾಗಿರುವ ಹಿನ್ನೆಲೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಅವರ ಗುರುತುಗಳನ್ನು ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ವನ್ಯಜೀವಿ ಸಂರಕ್ಷಿತ ಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ, ಚಿತ್ರೀಕರಣ ಹಾಗೂ ವನ್ಯಜೀವಿಗಳಿಗೆ ತೊಂದರೆ ಉಂಟುಮಾಡುವ ಚಟುವಟಿಕೆಗಳ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತಾಳಿದೆ.
ಈ ಕಾರ್ಯಾಚರಣೆಗೆ ನೇತೃತ್ವ ನೀಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಪ್ರಸನ್ನ ಕೃಷ್ಣ ಪಟಗಾರ್ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಅಭಯಾರಣ್ಯ ಪ್ರದೇಶಗಳಲ್ಲಿ ಇನ್ನಷ್ಟು ನಿಗಾ ಮತ್ತು ಪಹರೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















