Read - < 1 minute
ಚೆನ್ನೈ:ಸೆ:24:ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಅನಾರೋಗ್ಯಕ್ಕೀಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಜಯಲಲಿತಾ ಆರೋಗ್ಯವಾಗಿದ್ದು, ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಹೋಗುತ್ತಿಲ್ಲ ಎಂದು ಎಐಎಡಿಎಂಕೆ (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ) ಸ್ಪಷ್ಟಪಡಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಅತಿಯಾದ ಸಕ್ಕರೆ ಖಾಯಿಲೆ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಹೋಗಲಿದ್ದಾರೆಂಬುದು ಕೇವಲ ವದಂತಿ ಅಷ್ಟೇ. ಜಯಲಲಿತಾ ಅರೋಗ್ಯದಿಂದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಎಐಎಡಿಎಂಕೆ ವಕ್ತಾರೆ ಸಿ.ಆರ್. ಸರಸ್ವತಿ ಅವರು ಸ್ಪಷ್ಟನೆ ನೀಡಿದ್ದು, ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ, ಜಯಲಲಿತಾ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೋ, ಇಲ್ಲವೋ ಎಂಬುದರ ಕುರಿತಂತೆ ಯಾವುದೇ ಮಾಹಿತಿಗಳನ್ನು ಅವರು ಬಹಿರಂಗಪಡಿಸಿಲ್ಲ,
ಜಯಲಲಿತಾ ಅವರು ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದು, ಗುರುವಾರವಷ್ಟೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ಜಯಲಲಿತಾ ಅನಾರೋಗ್ಯ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಸಂದೇಶವೊಂದನ್ನು ರವಾನಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜಯಲಲಿತಾ ಅವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯೆಯನ್ನು ನೀಡಿದ್ದರು.
ತಮಿಳುನಾಡು ಜನತೆ ಜಯಲಲಿತಾ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ.
Discussion about this post